ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ
Facebook
Twitter
LinkedIn
WhatsApp

​ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಫೆಬ್ರವರಿ 20 ಮತ್ತು 21ರಂದು ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು.

​ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಈ ವಿಶೇಷ ಮೇಳ ಆಯೋಜಿಸಲಾಗಿದೆ. ಇದು ಯುವಜನತೆಗೆ ಉದ್ಯೋಗದ ಹೊಸ ಹಾದಿ ತೋರಿಸಲಿದೆ,” ಎಂದರು.

​ಗ್ರಾಮೀಣ ಯುವಜನತೆಗೆ ಆದ್ಯತೆ
​”ಈ ಉದ್ಯೋಗ ಮೇಳದಲ್ಲಿ ಸುಮಾರು 83 ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಕೇವಲ ವಿದ್ಯಾವಂತರಿಗಷ್ಟೇ ಅಲ್ಲದೆ, ಅನಕ್ಷರಸ್ಥರಿಗೂ ಅವರ ಕೌಶಲಕ್ಕೆ ತಕ್ಕಂತೆ ಉದ್ಯೋಗ ನೀಡಲು ಆದ್ಯತೆ ನೀಡಲಾಗಿದೆ. ಜಿಲ್ಲೆಯ ಹಾಗೂ ತಾಲ್ಲೂಕಿನ ಯುವಜನತೆ ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು,” ಎಂದು ಅವರು ಮನವಿ ಮಾಡಿದರು.

​ಸ್ಥಳದಲ್ಲೂ ಹೆಸರು ನೋಂದಾಯಿಸಲು ಅವಕಾಶ
​ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿ ಡಾ. ಜಿ.ಎಸ್. ಶಿವಕುಮಾರ್ ಮಾತನಾಡಿ, “ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರ ಸಹಕಾರದೊಂದಿಗೆ ಈ ಮೇಳ ಆಯೋಜಿಸಲಾಗಿದೆ. ಈಗಾಗಲೇ ಸಾವಿರಾರು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮೊದಲೇ ಹೆಸರು ನೋಂದಾಯಿಸಲು ಸಾಧ್ಯವಾಗದವರು ಮೇಳ ನಡೆಯುವ ಸ್ಥಳದಲ್ಲೂ ಹೆಸರು ನೋಂದಾಯಿಸಿ ಸಂದರ್ಶನದಲ್ಲಿ ಭಾಗವಹಿಸಬಹುದು,” ಎಂದು ಮಾಹಿತಿ ನೀಡಿದರು.

​ಕುಮದ್ವತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಎಂ. ವೀರೇಂದ್ರ ಹಾಗೂ ಕುಮದ್ವತಿ ಸಿದ್ಧ ಉಡುಪು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಎಸ್. ವಿದ್ಯಾಶಂಕರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

News By: Raghu Shikari-7411515737